ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.!
ರಾಜ್ಯದಲ್ಲಿ ಮುಂಗಾರು ಪ್ರವೇಶಿಸುವ ಮೂನ್ಸೂಚನೆ ಸಿಕ್ಕಿದ ಬೆನ್ನಲ್ಲೇ ಭಾನುವಾರದಿಂದ (ಜೂ 2) ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ. ಜೂನ್ 2 ರಂದು ಮುಂಗಾರು ಪ್ರವೇಶವಾಗುವ ಬೆನ್ನಲ್ಲೇ ಮಳೆಯ ಆರ್ಭಟ ಅಧಿಕವಾಗುವ ನಿರೀಕ್ಷೆಯಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…!
ಜೂ.3 ಮತ್ತು 4ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಧಿಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 3 ಸೆಂ.ಮೀ., ಧರ್ಮಸ್ಥಳ , ಪಣಂಬೂರು ಮತ್ತು ಪುತ್ತೂರಿನಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.
ಜೂನ್ 1 ರಿಂದ 3 ರವರೆಗೆ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 4 ರಿಂದ 7 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರಾವಳಿ ಭಾಗದಲ್ಲಿ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣದಲ್ಲಿ ವರುಣ ಅಬ್ಬರಿಸಿದ್ದಾನೆ. ಮನೆಗಳಿಗೆ ನೀರು ನುಗ್ಗಿ ಪರದಾಟ ನಡೆಸಿದ್ದಾರೆ.
ಈ ಬಾರಿ ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಕಟ್ಟೆಚ್ಚರದ ಅಗತ್ಯವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಬಿಎಂಪಿಗೆ ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ ಸೂಚನೆ ನೀಡಿದ್ದಾರೆ.
ಯಾವ ಜಿಲ್ಲೆಗಳಲ್ಲಿ ಮತ್ತೆ ಮಳೆ?
ಜೂನ್ 1ರಿಂದ ಮಳೆ ಅಬ್ಬರ ಮತ್ತೆ ಶುರುವಾಗುವ ನಿರೀಕ್ಷೆ ಇತ್ತು, ಇಂದು ಮಳೆ ಆರ್ಭಟದ ಮುನ್ಸೂಚನೆ ಸಿಕ್ಕಿತ್ತು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೊಡಗು & ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಮುನ್ಸೂಚನೆ ಇತ್ತು. ಬೆಂಗಳೂರು ಸುತ್ತಮುತ್ತ ಕೂಡ ಮಳೆಯಾಗುವ ನಿರೀಕ್ಷೆ ಇತ್ತು. ಅದರಂತೆ ಈಗ ಮಳೆ ಅಬ್ಬರ ಶುರುವಾಗಿದೆ. ಅಲ್ಲದೆ, ಜೂನ್ 3 ರಂದು ಮಳೆ ತನ್ನ ಅಸಲಿ ಮುಖ ತೋರಿಸಲಿದೆ ಎಂಬ ಮಾಹಿತಿ ಇದೆ.
ಕಲಬುರಗಿ, ವಿಜಯಪುರ, ಗದಗ…
ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ & ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗೆ ಭಾರಿ & ಭರ್ಜರಿ ಮಳೆ ಆಗಮನಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ರೈತರು ಕೂಡ ಈ ಸುದ್ದಿಯನ್ನ ಕೇಳಿ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.